ವಿಜಯಪುರ: ಪ್ರವಾಹ ಸಂತ್ರಸ್ತರ ಬಗ್ಗೆ ನಾನು ಧ್ವನಿ ಎತ್ತದಿದ್ದರೆ ಸಿಎಂ ಯಡಿಯೂರಪ್ಪ 15 ದಿನದಲ್ಲಿ ರಾಜೀನಾಮೆ ನೀಡುವ ಪರಿಸ್ಥಿತಿ ಎದುರಾಗಿತ್ತು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ವಿಜಯಪುರ ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಗ್ಗೆ ನನಗೆ ದೆಹಲಿಯಿಂದ ಈಗ ಮಾಹಿತಿ ಸಿಕ್ಕಿದೆ. ಕರ್ನಾಟಕದ ಇಬ್ಬರು ಕೇಂದ್ರ ಸಚಿವರು ಯಡಿಯೂರಪ್ಪ ಅವರನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಮಮತಾ ಬ್ಯಾನರ್ಜಿ ಪ್ರಧಾನಿ ಭೇಟಿಗೆ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ, ರಾಜ್ಯದ ಸಚಿವರಿಬ್ಬರ ಕುತಂತ್ರದಿಂದ ಯಡಿಯೂರಪ್ಪ ಭೇಟಿಗೆ ಅವಕಾಶ ನಿರಾಕರಿಸಲಾಗುತ್ತದೆ ಎಂದರು.
ಯಡಿಯೂರಪ್ಪ ಬಗ್ಗೆ ನಿಮಗೆ ಅಸಮಾಧಾವಿದ್ದರೆ 76 ವಯಸ್ಸಾಗಿದೆ ಎಂದು ಕರೆಯಿಸಿ ರಾಜೀನಾಮೆ ಪಡೆದುಕೊಳ್ಳಲಿ, ಅನಂತಕುಮಾರ್, ಯಡಿಯೂರಪ್ಪ ಈ ಹಿಂದೆ ಜಗಳವಾಡುತ್ತಿದ್ದರು. ಆದರೆ, ಪಕ್ಷ, ಕರ್ನಾಟಕ, ದೇಶದ ಹಿತ ಬಂದಾಗ ಒಗ್ಗೂಡುತ್ತಿದ್ದರು. ಆದರೆ, ಈಗ ರಾಜ್ಯದಲ್ಲಿ ನಡೆದಿರುವುದೇ ಬೇರೆ ಎಂದು ಅಸಮಾಧಾನ ಹೊರಹಾಕಿದರು.
ನಂತರ ಪ್ರತಿಕ್ರಿಯೆ ನೀಡಿದ ಅವರು, ಶಿಸ್ತು ಉಲ್ಲಂಘಿಸದ ನಾನು ಶೋಕಾಸ್ ನೋಟೀಸಿಗೆ ಉತ್ತರ ನೀಡುವುದಿಲ್ಲ, ಆದ್ದರಿಂದ ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ, ಅಮಿತ ಶಾ, ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿದ್ದೇನೆ. ಪ್ರಧಾನಿ ಬಳಿ ರಾಜ್ಯದ ಜನರ ಭಾವನೆ ಹೇಳಿಕೊಳ್ಳಲು ನಾನೇನೂ ಹೆದರಲ್ಲ, ನಾನು ಹೇಳಿಕೆ ನೀಡಿದ ಮೇಲೆ ಇಬ್ಬರು ಸಚಿವರು ದೆಹಲಿಗೆ ಹೋಗಿದ್ದರು. ಅವರು ಪ್ರವಾಹ ಪರಿಹಾರ ತರಲು ಹೋಗಿರಲಿಲ್ಲ, ಆದರೆ, ನನಗೆ ನೋಟೀಸ್ ಕೊಡಿಸಲು ಹೋಗಿದ್ದರು ಇಂಥ ಚಾಡಿಕೋರ ಸಚಿವರಿಂದ ರಾಜ್ಯದಲ್ಲಿ ಬಿಜೆಪಿ ಹಾಳಾಗುತ್ತಿದೆ ಎಂದು ಕಿಡಿಕಾರಿದರು.
ಪಕ್ಷ ಉಳಿಸುವ ಬಯಕೆ ಇದ್ದರೆ ಯಡಿಯೂರಪ್ಪ ಮತ್ತು ಅವರ ವಿರೋಧಿಗಳನ್ನು ಒಟ್ಟಿಗೆ ಕೂಡಿಸಿ ಸಮಸ್ಯೆ ಬಗೆಹರಿಸಿ, ಇದನ್ನು ಮಾಡದ ನಿಮ್ಮನ್ನು ನಾಯಕರೆಂದು ಹೇಗೆ ಕರೆಯಬೇಕು? ನಾನು ಕರ್ನಾಟಕದಿಂದ ಬಿಜೆಪಿಯಿಂದ ಕೇಂದ್ರ ಸಚಿವನಾದ ನಾಲ್ಕನೇ ವ್ಯಕ್ತಿ, ನನ್ನನ್ನು ಹೊರ ಹಾಕಿದರೆ ನನಗೇನೂ ಹಾನಿಯಿಲ್ಲ, ನನ್ನ ಶಕ್ತಿಯನ್ಮು ವಿಧಾನ ಪರಿಷತ್ ನಲ್ಲಿ ತೋರಿಸಿದ್ದೇನೆ ಪಕ್ಷೇತರನಾಗಿ ಗೆದ್ದಿದ್ದೇನೆ. ನಾನು ಬಿಜೆಪಿ ಸೇರುವಾಗ ಇವರೇನೂ ಸ್ವಾಗತಿಸಿಲ್ಲ, ಅಮೀತ್ ಶಾ, ಪ್ರಕಾಶ್ ಜಾವಡೇಕರ್ ನನ್ನ ಶಕ್ತಿಯನ್ನು ನೋಡಿ ವಿಧಾನ ಸಭೆ ಚುನಾವಣೆ ಸಂದರ್ಭದಲ್ಲಿ ಸೇರಿಸಿಕೊಂಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.