ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ರಾಮನಗರದವರೆಗೂ ಸಾಗಿ ಬಂದಿದ್ದು, ಇಂದೇ ಕಾಂಗ್ರೆಸ್ ಪಾದಯಾತ್ರೆ ಕೊನೆಯಾಗುವ ಸಾಧ್ಯತೆ ಇದೆ.
ಒಂದೆಡೆ ಸರ್ಕಾರ ತಕ್ಷಣವೇ ಪಾದಯಾತ್ರೆ ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದೆ. ಮತ್ತೊಂದೆಡೆ ಕಾಂಗ್ರೆಸ್ ನಾಯಕರು ಯಾವುದೇ ಕಾರಣಕ್ಕೂ ಪಾದಯಾತ್ರೆ ಸ್ಥಗಿತಗೊಳಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ರಾಮನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಕಾಂಗ್ರೆಸ್ ಜಿಲ್ಲಾ ಕಚೇರಿ ಅನತಿ ದೂರದಲ್ಲಿ ಹಾಗೂ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿ ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಮಾಡಲಾಗಿದೆ.
ಜಿಲ್ಲಾಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬಹುತೇಕ ಇಂದೇ ಪಾದಯಾತ್ರೆಗೆ ಬ್ರೇಕ್ ಬೀಳುವ ಸಾಧ್ಯತೆಯಿದೆ.